ಸುದ್ದಿ ಕಣಜ.ಕಾಂ
ಶಿಕಾರಿಪುರ: ಉತ್ತರ ಕರ್ನಾಟಕದ ಸಂಪರ್ಕ ಬೆಸೆಯುವ ಕೊಂಡಿಯಾಗಿರುವ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗದ ನಿರ್ಮಾಣಕ್ಕಾಗಿ 2021-22ನೇ ಸಾಲಿನ ಕೇಂದ್ರ ಮುಂಗಡ ಪತ್ರದಲ್ಲಿ 100 ಕೋಟಿ ರೂಪಾಯಿ ಕಾಯ್ದಿರಿಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ಭಾಗದ ಜನರ ಬಹುದಿನಗಳ ಕನಸಾಗಿರುವ ಈ ರೈಲು ಮಾರ್ಗದ ನಿರ್ಮಾಣ ಕಾರ್ಯಕ್ಕೆ ಅಗತ್ಯವಾಗಿರುವ ಭೂಮಿಯನ್ನು ಕೆ.ಐ.ಡಿ.ಬಿ. ಸಂಸ್ಥೆಯ ಮೂಲಕ ಭೂಸ್ವಾದೀನ ಮಾಡಿಕೊಳ್ಳುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ.
ರೈಲ್ವೆ ಕ್ಷೇತ್ರದಲ್ಲಿ ಕ್ರಾಂತಿ | ಈ ರೈಲು ಮಾರ್ಗದ ನಿರ್ಮಾಣ ಸಂಬಂಧ ಕೇಂದ್ರ ರೈಲ್ವೆ ಸಚಿವರೊಂದಿಗೆ ನಿರಂತರ ಸಂಪರ್ಕಿಸಿ, ಸಮಾಲೋಚನೆ ನಡೆಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ.
2019-20ರ ಕೇಂದ್ರ ಮುಂಗಡ ಪತ್ರದಲ್ಲಿ ಶಿವಮೊಗ್ಗ ಭಾಗದಲ್ಲಿ ರೈಲು ಸಂಚಾರವನ್ನು ಹೆಚ್ಚಿಸಲು ಮೂಲ ಅಗತ್ಯ ಎನಿಸಿರುವ ಕೋಚಿಂಗ್ ಡಿಪೋ ಅನ್ನು ಶಿವಮೊಗ್ಗ ಸಮೀಪದ ಕೋಟೆಗಂಗೂರಿನಲ್ಲಿ ನಿರ್ಮಿಸಲು ಅಗತ್ಯ ಅನುದಾನ ಮಂಜೂರಾಗಿದೆ.
ಅಲ್ಲದೇ, ಇದಕ್ಕೆ ಬೇಕಾಗಿರುವ ಹೆಚ್ಚುವರಿ ಭೂಮಿಯನ್ನು ಖಾಸಗಿಯವರಿಂದ ಭೂಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ಚಾಲ್ತಿಯಲಿದೆ. ರೈಲ್ವೆ ಇಲಾಖೆಯು ಆರಂಭಿಕ ಕಾಮಗಾರಿ ಅನುಷ್ಠಾನಕ್ಕೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿದೆ. ಅದಕ್ಕಾಗಿ ಮುಂಗಡ ಪತ್ರದಲ್ಲಿ 12 ಕೋಟಿ ರೂ.ಗಳನ್ನು ಮೀಸಲಿರಿಸಿದೆ ಎಂದು ತಿಳಿಸಿದ್ದಾರೆ.