ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜನರಿಗೆ ಸುಲಭವಾಗಿ ಮರಳು ಸಿಗುವಂತೆ ಖಾತ್ರಿಪಡಿಸಲು ಸರ್ಕಾರ ಹೊಸ ಮರಳು ನೀತಿಯನ್ನು ಜಾರಿಗೊಳಿಸಿದೆ. ಅದರ ಪ್ರಕಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಳ್ಳ ತೊರೆಗಳಲ್ಲಿ ಲಭ್ಯವಿರುವ ಮರಳನ್ನು ಗುರುತಿಸಿ ಸ್ಥಳೀಯವಾಗಿ ಅದನ್ನು ವಿಲೇವಾರಿ ಮಾಡಲು ಗ್ರಾಮ ಪಂಚಾಯತಿಗಳಿಗೆ ಅನುಮತಿ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಕ್ವಾರಿ, ಕ್ರಷರ್ ಮತ್ತು ಮರಳು ಸಾಗಾಣಿಕೆ ಜಿಲ್ಲಾ ಸಮಿತಿ ಸಭೆಯಲ್ಲಿ ಈ ಕುರಿತು ಪರಿಶೀಲನೆ ನಡೆಸಿ ಮಾತನಾಡಿದರು.
ಕ್ರಿಮಿನಲ್ ಕೇಸ್ | ಜಿಲ್ಲಾ ಸಮಿತಿಯು ನಿಗದಿಪಡಿಸಿದ ಪ್ರಮಾಣದ ಮರಳನ್ನು ದೈಹಿಕ ಶ್ರಮದಿಂದ ಹೊರತೆಗೆದು ಟ್ರಾಕ್ಟರ್, ಚಕ್ಕಡಿಯಂತಹ ಸಣ್ಣ ವಾಹನಗಳ ಮೂಲಕ ಸಾಗಿಸಲು ಮಾತ್ರ ಅವಕಾಶವಿದೆ. ಆಶ್ರಯ ಮನೆ ನಿರ್ಮಾಣ, ಸರ್ಕಾರಿ ಕಾಮಗಾರಿಗಳಿಗೆ ಆದ್ಯತೆ ನೀಡಬೇಕು. ಸ್ಥಳೀಯವಾಗಿ ಮರಳು ನಿರ್ವಹಣೆಗೆ ಗ್ರಾಮ ಪಂಚಾಯಿಯಿ ಪಿಡಿಒ ಮತ್ತು ಅಧ್ಯಕ್ಷರು ನೇರ ಹೊಣೆಯಾಗಿದ್ದು, ಮಾರ್ಗಸೂಚಿಯನ್ನು ಉಲ್ಲಂಘಿಸುವವರ ವಿರುದ್ಧ ತಕ್ಷಣ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಎಚ್ಚರಿಕೆ ನೀಡಿದರು.
ಜಿಲ್ಲೆಯಲ್ಲಿ ಪ್ರಸ್ತುತ ಈ ರೀತಿಯಲ್ಲಿ 2.56 ಮೆಟ್ರಿಕ್ ಟನ್ ಮರಳು ಲಭ್ಯವಿದೆ. ಬೇರೆ ತಾಲೂಕುಗಳಲ್ಲಿ ಇಂತಹ ಮರಳು ಸಂಗ್ರಹ ಗುರುತಿಸುವ ಕಾರ್ಯವನ್ನು ಆದಷ್ಟು ಬೇಗನೆ ಪೂರ್ಣಗೊಳಿಸುವಂತೆ ಸೂಚಿಸಿದರು.
23.26 ಲಕ್ಷ ರೂಪಾಯಿ ದಂಡ | ಪ್ರಸ್ತುತ ವರ್ಷ ಇದುವರೆಗೆ ಜಿಲ್ಲೆಯಲ್ಲಿ ನಾಲ್ಕು ಅಕ್ರಮ ಮರಳು ಸಾಗಾಟ ಮತ್ತು ದಾಸ್ತಾನು ಪ್ರಕರಣಗಳಲ್ಲಿ ಮೊಕದ್ದಮೆ ದಾಖಲಿಸಲಾಗಿದೆ. ಅನಧಿಕೃತ ಮರಳುಗಾರಿಕೆಯ 33 ಪ್ರಕರಣಗಳಲ್ಲಿ 23.26 ಲಕ್ಷ ರೂ. ದಂಡ ವಿಧಿಸಲಾಗಿದೆ. 18 ಅನಧಿಕೃತ ಕಲ್ಲು ಗಣಿಗಾರಿಕೆ ಪ್ರಕರಣಗಳಲ್ಲಿ ಮೊಕದ್ದಮೆ ದಾಖಲಿಸಲಾಗಿದೆ. ಅನಧಿಕೃತ ಕಲ್ಲು ಗಣಿಗಾರಿಕೆ ಹಾಗೂ ಸಾಗಾಟದ 54 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದ್ದು, 41 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನಿ ರಾಮ್ಜಿ ಸಭೆಗೆ ಮಾಹಿತಿ ನೀಡಿದರು.
ಎಸ್.ಪಿ. ಕೆ.ಎಂ.ಶಾಂತರಾಜು, ಜಿಪಂ ಸಿಇಒ ಎಂ.ಎಲ್.ವೈಶಾಲಿ, ಎಸಿ ಟಿ.ವಿ.ಪ್ರಕಾಶ್ ಉಪಸ್ಥಿತರಿದ್ದರು.
https://www.suddikanaja.com/2021/03/12/internal-complaints-committee-is-mandatory-even-in-private-institutions/