ಸುದ್ದಿ ಕಣಜ.ಕಾಂ | DISTRICT | POLITICAL NEWS
ಶಿವಮೊಗ್ಗ: ಮುಂಬರುವ ಚುನಾವಣೆಯಲ್ಲಿ ಜಿಲ್ಲೆಯಲ್ಲಿ `ರಾಜಕೀಯ ರಣಾಂಗಣ’ ಮಾಡಲಾಗುವುದು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ನಗರದ ಸರ್ಜಿ ಕನ್ವೆನ್’ಶನ್ ಹಾಲ್ ನಲ್ಲಿ ಶುಕ್ರವಾರ ಸಂಜೆ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಹಮ್ಮಿಕೊಂಡಿದ್ದ `ಚುನಾಯಿತ ಪ್ರತಿನಿಧಿಗಳ ಸಭೆ’ಯಲ್ಲಿ ಮಾತನಾಡಿದರು.
ಕರ್ನಾಟಕದಲ್ಲಿ ಬಿಜೆಪಿ ಮತ್ತು ಯಡಿಯೂರಪ್ಪ ಮುಗಿದ ಅಧ್ಯಾಯವಾಗಿದೆ. ಯಡಿಯೂರಪ್ಪ ಅವರು ಕಣ್ಣೀರು ಸುರಿಸುತ್ತಾ ರಾಜ್ಯದ ಸಿಎಂ ಸ್ಥಾನದಿಂದ ಕೆಳಗೆ ಇಳಿದಾಗಲೇ ಬಿಜೆಪಿಯೂ ರಾಜ್ಯದಲ್ಲಿ ಕೊಚ್ಚಿ ಹೋಗಿದೆ ಎಂದರು.
ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿಯೇ ಅಧಿಕಾರದಲ್ಲಿದ್ದರೂ ವಿವಿಧ ಪಕ್ಷಗಳಿಂದ ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿದ್ದಾರೆ. ಇದು ಕಾಂಗ್ರೆಸ್ ಗೆಲುವಿನ ಸಂಕೇತವಾಗಿದೆ. ಕಾಂಗ್ರೆಸ್ ಅಭಿಯಾನ ಶುರುವಾಗಲಿದ್ದು, ನೋಂದಣಿ ಮಾಡಿಸಿಕೊಳ್ಳುವಂತೆ ಮನವಿ ಮಾಡಿದರು.
ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿ ಆರ್.ಪ್ರಸನ್ನಕುಮಾರ್, ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಶಾಸಕ ಬಿ.ಕೆ.ಸಂಗಮೇಶ್, ಮಾಜಿ ಶಾಸಕರಾದ ಮಧು ಬಂಗಾರಪ್ಪ, ಕೆ.ಬಿ.ಪ್ರಸನ್ನಕುಮಾರ್, ವಡ್ನಾಳ್ ರಾಜಣ್ಣ, ಡಿ.ಜಿ.ಶಾಂತನಗೌಡ, ಬೇಳೂರು ಗೋಪಾಕೃಷ್ಣ, ಎಚ್.ಎಂ.ಚಂದ್ರಶೇಖರಪ್ಪ ಸೇರಿದಂತೆ ಕಾಂಗ್ರೆಸ್ ಮುಖಂಡರು, ಸ್ಥಳೀಯ ಸಂಸ್ಥೆಗಳ ಸದಸ್ಯರು ಉಪಸ್ಥಿತರಿದ್ದರು.